ಅಥವಾ

ಒಟ್ಟು 217 ಕಡೆಗಳಲ್ಲಿ , 38 ವಚನಕಾರರು , 154 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಿಂಗ ಸಹಿತವಾಗಿ ಸರ್ವಗುಣಂಗಳ ಭೋಗಿಸಬೇಕೆಂಬಲ್ಲಿ ಲಿಂಗಕ್ಕೆ ಕೊಟ್ಟು ತಾ ಕೊಂಬ ತೆರನಾವುದು? ಹೆಣ್ಣ ಕೊಡುವಲ್ಲಿ ತನ್ನಯ ವಿಕಾರವೊ ಲಿಂಗದ ಸುಖವೊ? ಹೊನ್ನ ಹಿಡಿವಲ್ಲಿ ತನ್ನಯ ಬಯಕೆಯೊ ಲಿಂಗದ ಭೋಗವೊ? ಮಣ್ಣ ಹಿಡಿವಲ್ಲಿ ತನ್ನಯ ಬೆಳೆಯೊ ಲಿಂಗದ ಇರವೊ? ಇಂತೀ ತ್ರಿವಿಧದ ಬಿಡುಮುಡಿಯನರಿತು, ಹೆಣ್ಣ ಬೆರಸಿದಲ್ಲಿ ಹೆಣ್ಣಿಗೆ ವಿಷಯಸುಖ ತೋರಿ ತನಗೆ ಆ ವ್ಯಾಪಾರ ಹಿಂಗಿ ನಿಂದ ನಿಜದುಳುಮೆ ಲಿಂಗಸುಖಿ. ಹೊನ್ನು ತನ್ನ ತಾ ಬಂದಲ್ಲಿ ಮುಟ್ಟಿ ಕೊಟ್ಟೆನೆಂಬುದನರಿಯದೆ ಅದು ದೃಷ್ಟದಿಂದ ಬಂದುದ, ತನ್ನಷ್ಟವೆಂಬುದನರಿದಿಪ್ಪಾತನೆ ನಿಸ್ಪ ೃಹ. ಮಣ್ಣ ಅಡಿವಿಡಿದು ಹಿಡಿದಲ್ಲಿ ಕರ್ಮರುಗಳಂತೆ ಕಾದರೆ ಅವು ಮುನ್ನಿನಂತೆ ಇರಲಿ ಎಂಬುದು ಪರಮ ನಿರ್ವಾಣ. ಇಂತೀ ತ್ರಿವಿಧ ಮಲಂಗಳಲ್ಲಿ ಅಮಲನಾಗಿ ಸರ್ವಗುಣ ಸಂಪನ್ನನಾದುದು ಲಿಂಗ ಭೋಗೋಪಭೋಗಿಯ ಅಂಗನಿರತ, ಸ್ವಯಾನುಭಾವಿಯ ಲಿಂಗಾಂಗ ಯೋಗ ಸಂಬಂಧ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 81 ||
--------------
ದಾಸೋಹದ ಸಂಗಣ್ಣ
ತಾಮಸ ಸಂಬಂಧ ಕನಿಷ್ಠಂಗೆ ಹುಸಿ ಜಾಗ್ರದಿಟದಂತೆ ತೋರುಗು. ರಾಜನ ಸಂಬಂಧ ಮಧ್ಯಮಂಗೆ ಹುಸಿ ತೂರ್ಯ ದಿಟದಂತೆ ತೋರುಗು. ಸಾತ್ವಿಕ ಸಂಬಂಧ ಉತ್ತಮಂಗೆ ದಿಟ ತಾನೆ ತಾನಾಗಿ ನಿಜ ನಿತ್ಯವಾಗಿರ್ದುದು, ಸಂದೇಹವಿಲ್ಲ. ಇದು ಸಚ್ಚಿದಾನಂದ ನಿತ್ಯ ಪರಿಪೂರ್ಣ ತೂರ್ಯಾತೀತವಪ್ಪ ತತ್ತ್ವ ಇಂತುಂಟೆಂದು ತಿಳಿದ ತಿಳಿವು ನೀನೇ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ಅರಿಕೆ ಉಳ್ಳನ್ನಕ್ಕ ಅರಿವು, ಅರಿವು ಉಳ್ಳನ್ನಕ್ಕ ಕುರುಹು, ಕುರುಹು ಉಳ್ಳನಕ್ಕ ಸತ್ಕಿೃೀ ಮಾರ್ಗಂಗಳು. ಆ ದೆಸೆಯಿಂದ ತ್ರಿವಿಧಸ್ಥಲ ರೂಪಾದವು. ಇಂತೀ ತ್ರಿವಿಧ ತ್ರಿವಿಧದಿಂದ ಷಡುಸ್ಥಲ ರೂಪಾಗಿ ಮೂಲ ಮೊಳೆಯೊಂದರಲ್ಲಿ ಹಲವು ಶಾಖೆ ಹೊಲಬಾದಂತೆ, ಇದು ನಿಜವಸ್ತುವಿನ ವಸ್ತುಕ. ಈ ಗುಣ ನಿರ್ಭಾವ ಭಾವವಾದ ಸಂಬಂಧ. ಇದು ವರ್ತಕ ಭಕ್ತಿಯ ಬ್ಥಿತ್ತಿ. ಉತ್ತರ ಪೂರ್ವದಲ್ಲಿ ಬೆರಸಿ ನಿರುತ್ತರವಾದ ಸಂಬಂಧ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.
--------------
ದಾಸೋಹದ ಸಂಗಣ್ಣ
ಆಯತದಲ್ಲಿ ಅಂಗಭೋಗಿಯಾಗಿರಬೇಕು. ಸ್ವಾಯತದಲ್ಲಿ ಸನ್ನಹಿತನಾಗಿರಬೇಕು. ಸನ್ನಹಿತದಲ್ಲಿ ಸದಾಚಾರಿಯಾಗಿರಬೇಕು. ಇಂತೀ ತ್ರಿವಿಧದಲ್ಲಿ ಏಕವಾಗಿರಬಲ್ಲಡೆ, ಅದು ವರ್ಮ, ಅದು ಸಂಬಂಧ, ಅದು ನಿಯತಾಚಾರವೆಂದೆಂಬೆನು. ಅದಲ್ಲದೆ ಲಿಂಗವ ಮರೆದು, ಅಂಗ[ವ]ಭೋಗಿಸಿ, ಅಂಗಸಂಗದಲ್ಲಿರ್ದು, ಅಂಗವೆ ಪ್ರಾಣವಾಗಿಹರಿಗೆಲ್ಲರಿಗೆಯೂ ಲಿಂಗದ ಶುದ್ಧಿ ನಿಮಗೇಕೆ ಕೇಳಿರಣ್ಣಾ. ಲಿಂಗವಂತನು ಅಂಗಸೂತಕಿಯಲ್ಲ. ಅಲಗಿನ ಕೊನೆಯ ಮೊನೆಯ ಮೇಲಣ ಸಿಂಹಾಸನದ ಮೇಲೆ ಲಿಂಗದ ಪ್ರಾಣವ ತನ್ನಲ್ಲಿ ಕೂಡಿಕೊಂಡು, ತನ್ನ ಪ್ರಾಣವ ಲಿಂಗದಲ್ಲಿ ಕೂಡಿಕೊಂಡು, ಏಕಪ್ರಾಣವ ಮಾಡಿಕೊಂಡಿಪ್ಪ ಶರಣನ ಜ್ಯೋತಿರ್ಮಯನೆಂಬೆನು, ಜಗದ ಕರ್ತನೆಂಬೆನು, ಜಗದಾರಾಧ್ಯನೆಂದೆಂಬೆನು ಕಾಣಾ, ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ. ನಿಮ್ಮ ಸಂಗಿಯ ನಿಲವಿನ ಪರಿಯ ನೀವೇ ಬಲ್ಲಿರಲ್ಲದೆ, ನಾನೆತ್ತ ಬಲ್ಲೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಮರುಳಶಂಕರದೇವ
ಹರಿದ ನೀರಿನ ಅಡಿಯ ಕಾಣಬಹುದಲ್ಲದೆ ನಿಂದ ಇಂಗಡಲಿನ ಅಡಿಯ ಕಂಡವರುಂಟೆ? ಚಲನೆಯಿಂದ ತೋರುವ ತೋರಿಕೆಯ ಕಾಣಬಹುದಲ್ಲದೆ ಶಬ್ದ ಮುಗ್ಧವಾದ ಶರಣನ ಚಿತ್ತವ ಭೇದಿಸಬಹುದೆ? ಅದು ಸರಿಹರಿದ ಸಂಬಂಧ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 99 ||
--------------
ದಾಸೋಹದ ಸಂಗಣ್ಣ
>ಸಾವ ಜೀವ ಬಿಂದುವಿನ ಸಂಚ, ಸಾಯದ ನಾದ ಪ್ರಾಣದ ಸಂಚ. ಸಾವ ಜೀವದ, ಸಾಯದ ಪ್ರಾಣದ _ಎರಡರ ಭೇದವನರಿಯದಿರ್ದಡೆ ಲಾಂಛನಧಾರಿ, ಸಾವ ಜೀವದ, ಸಾಯದ ಪ್ರಾಣದ ಎರಡರ ಭೇದವ ಭೇದಿಸಿ ಅರಿವು ಕಣ್ದೆರೆದ ಪ್ರಾಣಲಿಂಗಸಂಬಂಧವಂತಿರಲಿ, ಮತ್ತೆಯೂ ಪ್ರಾಣಲಿಂಗಸಂಬಂಧವೇ ಬೇಕು. ಇಂತೀ ಉಭಯ ಸಂಬಂಧವಳಿದ ಸಂಬಂಧ ನಿಜವಾಯಿತ್ತು. ಕೂಡಲಚೆನ್ನಸಂಗಾ ನಿಮ್ಮ ಶರಣಂಗೆ
--------------
ಚನ್ನಬಸವಣ್ಣ
ಕೃಷಿಯಿಂದ ಮುಂದಣ ಫಲವ ಕಾಬಂತೆ ಅಸಿಕಲಿಯಿಂದ ಮುಂದಣ ಅರಿಬಲವ ಗೆಲುವಂತೆ ಸತ್ಕ್ರೀಮಾರ್ಗ ಮರ್ಮ ಧರ್ಮಂಗಳನರಿದು ಮುಂದಣ ಆಸುರ ಕರ್ಮಂಗಳ ತಮ ಬಂಧಂಗಳನೀಸಿ ಗೆಲುವುದಕ್ಕೆ ಇಷ್ಟಲ್ಲದಿಲ್ಲ. ಇದು ವಸ್ತುಪೂಜಕನ ವಿಶ್ವಾಸ, ಸಂಗನಬಸವಣ್ಣನ ಸಂಬಂಧ. ಬ್ರಹ್ಮೇಶ್ವರಲಿಂಗವನರಿವುದಕ್ಕೆ ವಿಶ್ವಾಸಬ್ಥಿತ್ತಿ.
--------------
ಬಾಹೂರ ಬೊಮ್ಮಣ್ಣ
ಕಾಷ್ಠವ ಸುವರ್ಣವ ಮಾಡಿದೆನೆಂಬ ಘಾತುಕತನವೆ ನಿಮ್ಮ ಭಕ್ತಿ ? ಸಕಲ ದೇಶ ಕೋಶ ವಾಸ ಭಂಡಾರ ಸವಾಲಕ್ಷ ಮುಂತಾದ ಸಂಬಂಧ, ಸ್ತ್ರೀಯರ ಬಿಟ್ಟು ಬಂದೆನೆಂಬ ಕೈಕೂಲಿಯೆ ನಿಮ್ಮ ಭಕ್ತಿ ? ಬಸವಣ್ಣ ಚೆನ್ನಬಸವಣ್ಣ ಪ್ರಭುದೇವರು ಮುಂತಾದ ಏಳುನೂರೆಪ್ಪತ್ತು ಅಮರಗಣಂಗಳ ಭಾವವಿದ್ದಂತೆ ನಿಮ್ಮ ಅಗಡವೇಕಯ್ಯಾ ? ನಿಮ್ಮ ಅರಿವಿಂಗೆ ಇದಿರಿನಲ್ಲಿ ಕೂಡಿಹೆನೆಂಬ ಭಿನ್ನಭಾವವುಂಟೆ ಅಯ್ಯಾ ? ಕರ್ಪೂರದ ಅರಣ್ಯವ ಕಿಚ್ಚುಹತ್ತಿ ಬೆಂದಲ್ಲಿ ಭಸ್ಮ ಇದ್ದಿಲೆಂದು ಲಕ್ಷಿಸಲುಂಟೆ ? ನಿಮ್ಮ ಭಾವವ ನಿಮ್ಮಲ್ಲಿಗೆ ತಿಳಿದುಕೊಳ್ಳಿ. ನಿಮ್ಮ ಕೂಟಕ್ಕೆ ಎನ್ನ ನಾಚಿಕೆಯ ಬಿಡಿಸಿದ ತೆರನ ತಿಳಿದುಕೊಳ್ಳಿ. ಶಕ್ತಿಯ ಮಾತೆಂದು ಧಿಕ್ಕರಿಸಬೇಡಿ. ಹೊರಗೆ ಕೂಡಿಹೆನೆಂಬುದು ನಿಮ್ಮ ಅರಿವಿಂಗೆ ಹಾನಿ. ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಾ, ನಿಮ್ಮ ಶರಣರ ನೆಲೆಯ ನೀವೇ ನೋಡಿಕೊಳ್ಳಿ.
--------------
ಮೋಳಿಗೆ ಮಹಾದೇವಿ
ಭಕ್ತ ಜಂಗಮದ ಸಕೀಲಸಂಬಂಧವೆಂತಿಪ್ಪುದೆಂಬುದನಾರು ಬಲ್ಲರಯ್ಯಾ ? ಅದು ಉಪಮಾತೀತ ! ಭಕ್ತನೊಳಗೆ ಜಂಗಮವಡಗಿದಡೆ ಭಕ್ತನಾಗಿ ಕ್ರಿಯಾನಿಷ್ಪತ್ತಿಯಲ್ಲಿ ಸಮರಸಸುಖಿಯಾಗಿಪ್ಪ ನೋಡಯ್ಯಾ. ಜಂಗಮದೊಳಗೆ ಭಕ್ತನಡಗಿದಡೆ, ಕರ್ತೃಭೃತ್ಯಭಾವವಳಿದು ಸಂಬಂಧ ಸಂಶಯದೋರದೆ, ಅರಿವರತು ಮರಹು ನಷ್ಟವಾಗಿ, ಸ್ವತಂತ್ರ ಶಿವಚಾರಿಯಾಗಿರಬೇಕು ನೋಡಯ್ಯಾ. ಈ ಉಭಯಭಾವಸಂಗದ ಪರಿಣಾಮವ ಕಂಡು ಕೂಡಲಚೆನ್ನಸಂಗಯ್ಯನಲ್ಲಿ ಬಸವಪ್ರಭುದೇವರ ಶ್ರೀಪಾದಕ್ಕೆ ನಮೋ ನಮೋ ಎಂದು ಬದುಕಿದೆನು
--------------
ಚನ್ನಬಸವಣ್ಣ
ದೇಹವ ಮರೆಗೊಂಡಿಪ್ಪ ಆತ್ಮನಂತೆ, ಶಕ್ತಿಯ ಮರೆಗೊಂಡಿಪ್ಪ ಶಿವನಂತೆ, ಕ್ಷೀರವ ಮರೆಗೊಂಡಿಪ್ಪ ತುಪ್ಪದಂತೆ, ವಾಚ್ಯವ ಮರೆಗೊಂಡಿಪ್ಪ ಅನಿರ್ವಾಚ್ಯದಂತೆ, ಲೋಕಾರ್ಥದೊಳಡಗಿಪ್ಪ ಪರಮಾರ್ಥದಂತೆ, ಎನ್ನ ಆತ್ಮನೊಳಡಗಿಪ್ಪ ಪರಮಾರ್ಥ ತತ್ವವು, ಬೀಜದೊಳಡಗಿದ ವೃಕ್ಷದಂತೆ ಇದ್ದಿತಯ್ಯ. ನಾನರಿಯದ ಮುನ್ನ ಎನ್ನೊಳಡಗಿದ್ದಿತಯ್ಯ ಶರಣ ಲಿಂಗ ಸಂಬಂಧ, ಮಹಾಲಿಂಗಗುರು ಶಿವಸಿದ್ದೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಐನಾಯೆಂಬ ಅಕ್ಷರದ ಭೇದವನರಿತಡೆ ಅಪ್ಪುದರಿದೊಂದೂ ಇಲ್ಲ. ಸೀಮೆಯ ಮೀರಿದ ಸಂಬಂಧ ಸಂಬಂಧವ ಮೀರಿದ ಸೀಮೆ, ಅನುಮತದ ಮೀರಿದ ಆದ್ಥಿಕ್ಯ ಅಕ್ಷರವೆರಡರ ಅದ್ಥಿಕಾರ ಕಪಿಲಸಿದ್ಧಮಲ್ಲಿಕಾರ್ಜುನನ ಸಂಯೋಗ.
--------------
ಸಿದ್ಧರಾಮೇಶ್ವರ
ಅನಾದಿ ಪರಶಿವನಿಂದಾಕಾರವಾದ ಆದಿಬಿಂದು ಅನಾದಿಬಿಂದು ಚಿದ್ಬಿಂದು ಪರಬಿಂದುವೆ ಜಗದ ಮಧ್ಯದಲ್ಲಿ ಸ್ವಯ, ಚರ, ಪರ, ಭಕ್ತ, ಮಹೇಶ್ವರ, ಪ್ರಸಾದಿ ಪೂಜ್ಯ ಪೂಜಕತ್ವದಿಂದ ಚರಿಸುತ್ತಿರಲು, ಆ ಸಮಯದಲ್ಲಿ ಪ್ರಮಾದವಶದಿಂದ ಲಿಂಗಾಂಗಕ್ಕೆ ಸುಯಿಧಾನ ತಪ್ಪಿ ವಿಘ್ನಾದಿಗಳು ಬಂದು ತಟ್ಟಿ ಶಂಕೆ ಬಂದಲ್ಲಿ ಭಕ್ತ ಮಹೇಶ್ವರ ಶರಣಗಣಂಗಳು ವಿಚಾರಿಸಿ ನೋಡಿದಲ್ಲಿ ಸ್ಥೂಲವಾದಡೆ ಸದಾಚಾರಕ್ಕೆ ಹೊರಗು ಸೂಕ್ಷ್ಮವಾದಡೆ ಶರಣಗಣಂಗಳ ಸಮೂಹಮಧ್ಯದಲ್ಲಿ ಭೃತ್ಯಭಾವದಿಂದ ಹತ್ತು ಹನ್ನೊಂದ ಕೊಳತಕ್ಕುದಲ್ಲ ನೋಡಾ (ಕೊಳತಕ್ಕುದಲ್ಲದೆ?) ಕರ್ತೃತ್ವದಿಂದ ಹತ್ತು ಹನ್ನೊಂದ ಕೊಡತಕ್ಕುದಲ್ಲ ನೋಡಾ ! ಸ್ಥೂಲ ಸೂಕ್ಷ್ಮದ ವಿಚಾರವೆಂತೆಂದಡೆ: ಪರಶಿವಸ್ವರೂಪವಾದ ಇಷ್ಟಲಿಂಗದ ಷಟ್‍ಸ್ಥಾನದೊಳಗೆ ಆವ ಮುಖದಿಂದಾದಡೆಯು ಸುಯಿಧಾನ ತಪ್ಪಿ ಪೆಟ್ಟುಹತ್ತಿ ಭಿನ್ನವಾದಡೆ, ಭಕ್ತ ಮಹೇಶ್ವರ ಶರಣಗಣಂಗಳು ವಿಚಾರಿಸಿ ನೋಡಿ ಸ್ಥೂಲ ಸೂಕ್ಷ್ಮಕ್ಕೆ ತಕ್ಕ ಹರಗುರುವಚನ ವಿಚಾರಿಸಿರಿ ಸ್ಥೂಲ ಸೂಕ್ಷ್ಮಕ್ಕೆ ತಕ್ಕ ಪ್ರತಿಜ್ಞೆಯ ಮಾಡುವುದು, ಶಕ್ತಿ ಸ್ವರೂಪವಾದ ಅಂಗದ ಅವಯವಂಗಳಿಗೆ ಶಿವಾನುಕೂಲದಿಂದ ವ್ಯಾಘ್ರ ಭಲ್ಲೂಕ ದಂಷ್ಟ್ರ ಕರ್ಕಟ ವಾಜಿ ಮಹಿಷ ಸಾಗರದುಪ್ಪಿ ಗಜ ಶುನಿ ಶೂಕರ ಮಾರ್ಜಾಲ ಹೆಗ್ಗಣ ಉರಗ ಮೊದಲಾದ ಮಲಮಾಂಸಭಕ್ಷಕ ಪ್ರಾಣಿಗಳು ಮೋಸದಿಂದ ಪಾದ ಪಾಣಿ ಗುದ ಗುಹ್ಯ ದೇಹವ ಕಚ್ಚಿದಡೆ ಸ್ಥೂಲವೆನಿಸುವುದಯ್ಯಾ ! ಅದರಿಂದ ಮೇಲೆ ಜಿಹ್ವೆ ನಾಸಿಕ ನೇತ್ರ ಲಲಾಟ ಶ್ರೋತ್ರಂಗಳ ಕಚ್ಚಿದಡೆ ಸೂಕ್ಷ್ಮವೆನಿಸುವುದಯ್ಯಾ ! ಈ ಪ್ರಕಾರದಲ್ಲಿ ಲಿಂಗಾಂಗಕ್ಕೆ ಅಪಮೃತ್ಯು ಬಂದು ತಟ್ಟಿದಲ್ಲಿ ಆಚಾರಕ್ಕೆ ಹೊರಗಾದವರು ಗಣಮಧ್ಯದಲ್ಲಿ ಪ್ರಾಣವ ಬಿಡುವುದಯ್ಯಾ, ಇಂತಪ್ಪ ಆಚಾರಕ್ರಿಯಾನಿಷ್ಠನ ಭಕ್ತ ಮಹೇಶ್ವರ ಶರಣಗಣಂಗಳು ಜಂಗಮದ ಪಾದದಲ್ಲಿ ಸಮಾಧಿಯ ಮಾಡುವುದಯ್ಯಾ ಪ್ರಾಣತ್ಯಾಗವ ಮಾಡಲಾರದಿರ್ದಡೆ, ಭಕ್ತ ಮಹೇಶ್ವರ ಶರಣಗಣಂಗಳ ಮಹಾನೈಷ್ಠೆಯಿಂದ ಸಾಕ್ಷಾತ್ಪ್ರಭುವೆಂದು ನಂಬಿ ಅವರು ತೋರಿದ ಸೇವೆಯ ಮಾಡಿ, ಅವರು ಕೊಟ್ಟ ಧಾನ್ಯಾದಿಗಳ ಸ್ವಪಾಕವ ಮಾಡಿ ಮಹಾಪ್ರಸಾದವೆಂದು ಭಾವಿಸಿ ಪಾತಕಸೂತಕಂಗಳ ಹೊದ್ದದೆ ಆಚರಿಸಿದಾತಂಗೆ ಅವಸಾನಕಾಲದಲ್ಲಿ ಮಹಾಗಣಂಗಳು ಲಿಂಗಮುದ್ರಾಭೂಮಿಯಲ್ಲಿ ಪಾದದಳತೆಯಿಲ್ಲದೆ ನೋಟಮಾತ್ರ ಪ್ರಮಾಣಿಸಿ ಸಹಜಸಮಾಧಿಯ ಮಾಡಿ ಲಿಂಗಾಕೃತಿಪ್ರಣವಸಂಬಂಧವಾದ ತಗಡ ಸಂಬಂಧ ಮಾಡದೆ ಪುಷ್ಪಾಂಜಲಿಯ ಮಾಡದೆ, ಆ ನಿಕ್ಷೇಪ ಸ್ಥಾನದಲ್ಲಿ ಜಂಗಮದ ಪಾದವಿಟ್ಟು ಆ ಮರಣಸನ್ನದ್ಧನ ನಿಕ್ಷೇಪನ ಮಾಡುವುದಯ್ಯಾ. ಈ ರೀತಿಯಿಂದಾಚರಿಸಿದಡೆ ಮರಳಿ ಗುರುಕರಜಾತನಾಗಿ ಸದ್ಭಕ್ತಿ ಜ್ಞಾನಾಚಾರ ಕ್ರೀಯಲ್ಲಿ ನಡೆನುಡಿಸಂಪನ್ನನಾಗಿ ಷಟ್‍ಸ್ಥಲದ ಬ್ರಹ್ಮವ ಕೂಡಿ ಘನಸಾರದಂತೆ ಸರ್ವಾಂಗವೆಲ್ಲ ಜ್ಯೋತಿರ್ಮಯಲಿಂಗದಲ್ಲಿ ನಿರವಯವಪ್ಪುದು ನೋಡಾ ! ಇಂತು ಗುರುಮಾರ್ಗಾಚಾರವ ಮೀರಿ, ಅವಧೂತಮಾರ್ಗದಲ್ಲಿ ನಡೆದಡೆ, ಇರುವೆ ಮೊದಲಾನೆ ಕಡೆಯಾದ ಸಮಸ್ತ ಯೋನಿಯಲ್ಲಿ ಜನಿಸಿ, ಸುಖ-ದುಃಖ, ಪುಣ್ಯ-ಪಾಪ, ಸ್ವರ್ಗ-ನರಕವನನುಭವಿಸಿ ಕಾಲಕಾಮಾದಿಗೊಳಗಾಗಿ ಗುರುಮಾರ್ಗಾಚಾರಕ್ಕೆ ಹೊರಗಾಗಿ ಹೋಹರು ನೋಡಾ, ಕೂಡಲಚೆನ್ನಸಂಗಮದೇವಾ !
--------------
ಚನ್ನಬಸವಣ್ಣ
ವೇದದ ಉತ್ತರವ ವಿಚಾರಿಸಿ, ಶಾಸ್ತ್ರದ ಸಂದೇಹವ ನಿಬದ್ಧಿಸಿ ಪುರಾಣದ ಅಬ್ಥಿಸಂದ್ಥಿಯ ತಿಳಿದು ಇಂತಿವು ಮೊದಲಾದ ಆಗಮಂಗಳಲ್ಲಿ ಚಿಂತಿಸಿಯೆ ನೋಡಿ ಸಕಲಯುಕ್ತಿ ಶಬ್ದಸೂತ್ರಂಗಳಲ್ಲಿ ಪ್ರಮಾಣಿಸಿಯೆ ಕಂಡು ಮಾತುಗಂಟಿತನದಲ್ಲಿ ತರ್ಕಶಾಸ್ತ್ರಂಗಳಿಗೆ ಹೋಗದೆ ಪಂಚವಿಂಶತಿತತ್ವದೊಳಗಾದ ಆಧ್ಯಾತ್ಮ ಆದಿಭೌತಿಕವ ತಿಳಿದು ಪಂಚಭೂತಿಕದ ಸಂಚಿತ ಪ್ರಾರಬ್ಧ ಆಗಾಮಿಗಳ ಸಂಚಿನ ಸಂಕಲ್ಪವ ತಿಳಿದು ಪೃಥ್ವಿತತ್ವದ ಮಲ, ಅಪ್ಪುತತ್ವದ ಸಂಗ, ತೇಜತತ್ವದ ದಗ್ಧ, ವಾಯುತತ್ವದ ಸಂಚಲ, ಆಕಾಶತತ್ವದ ಬಹುವರ್ಣಕೃತಿ. ಇಂತೀ ಪಂಚಭೂತಿಕಂಗಳಲ್ಲಿ ತಿಳುವಳವಂ ಕಂಡು ಕರಂಡದಲ್ಲಿ ನಿಂದ ಗಂಧದಂತೆ ತನ್ನಂಗವಿಲ್ಲದೆ ಗಂಧ ತಲೆದೋರುವಂತೆ ವಸ್ತುಘಟಭೇದವಾದ ಸಂಬಂಧ. ಇಂತೀ ತೆರನ ತಿಳಿದು ವಾಗ್ವಾದಂಗಳಲ್ಲಿ ಹೋರಿಹೆನೆಂದಡೆ ಮಹಾನದಿಯ ವಾಳುಕದ ಮರೆಯ ನೀರಿನಂತೆ ಚೆಲ್ಲಿ ಕಂಡೆಹೆನೆಂದಡೆ ಆ ನದಿವುಳ್ಳನ್ನಕ್ಕ ಕಡೆಗಣಿಸಬಾರದು. ನಿಂದಲ್ಲಿ ಪ್ರಮಾಣುವಿಂದಲ್ಲದೆ ಮೀರಿ ತುಂಬದಾಗಿ ಇಂತೀ ಶ್ರುತ್ಯರ್ಥವಿಚಾರದಿಂದ ಹಾಕಿದ ಮುಂಡಿಗೆ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವಲ್ಲದಿಲ್ಲಾಯೆಂದು.
--------------
ಪ್ರಸಾದಿ ಭೋಗಣ್ಣ
ಹಸಿವಿಲ್ಲದೆ ಉಣಬಲ್ಲಡೆ, ಉಪಾಧಿಯಿಲ್ಲದೆ ಬೇಡಬಲ್ಲಡೆ, ಅದು ವರ್ಮ, ಅದು ಸಂಬಂಧ. ಗಮನವಿಲ್ಲದೆ ಸುಳಿಯಬಲ್ಲಡೆ, ನಿರ್ಗಮನಿಯಾಗಿ ನಿಲಬಲ್ಲಡೆ ಅದು ವರ್ಮ, ಅದು ಸಂಬಂಧ. ಅವರ ನಡೆ ಪಾವನ, ಅವರ ನುಡಿ ತತ್ವ, ಅವರು(ರ?) ಜಗದಾರಾಧ್ಯರೆಂಬೆ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಮೃತ್ತಿಕೆಯ ತಿಟ್ಟದಿಂದ ಮಯಣದ ಕರುವಿಟ್ಟು, ಆ ಘಟವ ಲಕ್ಷಿಸಲಿಕ್ಕಾಗಿ, ಪುನರಪಿಯಾಗಿ ಮೃತ್ತಿಕೆಯ ಬಲಿದು ಈ ಉಭಯದ ಮಧ್ಯದಲ್ಲಿ ನಿಂದ ತಿಟ್ಟದಂತೆ ಇಂತೀ ತ್ರಿವಿಧ ಜಾರಿ ಉಳುಮೆ ಒಂದೆ ನಿಂದುದನರಿದು, ಭಕ್ತಿಯ ಮರೆಯಲ್ಲಿದ್ದ ಸತ್ಯ, ಸತ್ಯದ ಮರೆಯಲ್ಲಿ ವಿಶ್ರಮಿಸಿದ್ದ ಜ್ಞಾನ, ಜ್ಞಾನವ ವಿಶ್ರಮಿಸಿಕೊಂಡಿಹ ಶಿವಲಿಂಗಮೂರ್ತಿಧ್ಯಾನ, ಅದು ತದ್ಧ್ಯಾನವಾಗಲಿಕ್ಕಾಗಿ, ಅದು ನಿಜದ ಉಳುಮೆ; ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನನಲ್ಲಿ ಸಾವಧಾನಿಯ ಸಂಬಂಧ.
--------------
ಮೋಳಿಗೆ ಮಹಾದೇವಿ
ಇನ್ನಷ್ಟು ... -->