ಅಥವಾ

ಒಟ್ಟು 68 ಕಡೆಗಳಲ್ಲಿ , 31 ವಚನಕಾರರು , 52 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೃದಯದ ಬಾವಿಯ ತಡಿಯಲ್ಲಿ ಒಂದು ಬಾಳೆ ಹುಟ್ಟಿತ್ತು ! ಆ ಬಾಳೆಯ ಹಣ್ಣ ಮೆಲಬಂದ ಸರ್ಪನ ಪರಿಯ ನೋಡಾ. ಬಾಳೆ ಬೀಗಿ ಸರ್ಪನೆದ್ದೆಡೆ_ನಿರಾಳವು ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಅಯ್ಯ ಪಂಚತತ್ವಂಗಳ ಪಡೆವ ತತ್ವ ಪ್ರತ್ಯಕ್ಷವಾಗದ ಮುನ್ನ, ಪದ್ಮಜಾಂಡವ ಧರಿಸಿಪ್ಪ ಕಮಠ-ದಿಕ್ಕರಿಗಳಿಲ್ಲದ ಮುನ್ನ, ನಿರ್ಮಲಾಕಾಶವೇ ಸಾಕಾರವಾಗಿ ನಿರಂಜನವೆಂಬ ಪ್ರಣವವಾಯಿತ್ತಯ್ಯ ಆ ನಿರಂಜನ ಪ್ರಣವವೆಂಬ ಮರುಜೇವಣಿಯ ಬೀಜ, ಹ್ರೂಂಕಾರ ಮಂಟಪದಲ್ಲಿ ಮೂರ್ತಿಗೊಂಡಿತಯ್ಯ. ಆ ನಿರಂಜನ ಪ್ರಣವವೆಂಬ ಮರುಜೇವಣಿಯ ಬೀಜ, ತನ್ನ ನಿರಂಜನ ಶಕ್ತಿಯ ನಸುನೆನಹಿಂದ ಹಂಕಾರ ಚಕ್ಷುವೆಂಬ ಕುಹರಿಯಲ್ಲಿ ಶುದ್ಧಪ್ರಸಾದವೆಂಬ ಮೊಳೆದೋರಿತ್ತಯ್ಯ. ಆ ಶುದ್ಧ ಪ್ರಸಾದವೆಂಬ ಮೊಳೆ ತನ್ನ ಶೂನ್ಯಶಕ್ತಿಯ ಸೆಜ್ಜೆಯಿಂದ ಕರ್ಣಿಕಾಪ್ರಕಾಶ ಪಂಚನಾದವನುಳ್ಳ ಷೋಡಶ ಕಲಾಪುಂಜರಂಜಿತವಪ್ಪ ಹನ್ನೊಂದನೂರುದಳದ ಪತ್ರದಲ್ಲಿ ಪ್ರಣವಚಿತ್ರವೊಪ್ಪಿತ್ತಿಪ್ಪ ಹ್ರೀಂಕಾರ ಸಿಂಹಾಸನದ ಮೇಲೆ ಸಿದ್ಧಪ್ರಸಾದವೆಂಬ ಎಳವೆರೆ ತಳಿರಾಯಿತ್ತಯ್ಯ. ಆ ಸಿದ್ಧಪ್ರಸಾದವೆಂಬ ಎಳವೆರೆ ತನ್ನ ಶಾಂತಶಕ್ತಿಯ ಚಲನೆಯಿಂದ ಮೂರುಬಟ್ಟೆಯ ಮೇಲಿಪ್ಪ ಎರಡುಮಂಟಪದ ಮಧ್ಯದಲ್ಲಿ ಪ್ರಸಿದ್ಧಪ್ರಸಾದವೆಂಬ ಮಹಾವೃಕ್ಷ ಬೀಗಿ ಬೆಳೆಯಿತ್ತಯ್ಯ. ಆ ಪ್ರಸಿದ್ಧಪ್ರಸಾದವೆಂಬ ಮಹಾವೃಕ್ಷ ತನ್ನ ಚಿಚ್ಛಕ್ತಿಯ ಲೀಲಾವಿನೋದದಿಂದ ಪಂಚಶಕ್ತಿಗಳೆಂಬ ನಾಲ್ಕೊಂದು ಹೂವಾಯಿತು. ಆ ಹೂಗಳ ಮಹಾಕೂಟದಿಂದ ಪಂಚಲಿಂಗಗಳೆಂಬ ಪಂಚಪ್ರಕಾರದ ಮೂರೆರಡು ಹಣ್ಣಾಯಿತು. ಆ ಹಣ್ಣುಗಳ ಆದ್ಯಂತಮಂ ಪಿಡಿದು ಸದ್ಯೋನ್ಮುಕ್ತಿಯಾಗಬೇಕೆಂದು ಸದಾಕಾಲದಲ್ಲಿ ಬಯಸುತ್ತಿಪ್ಪ ಮಹಾಶಿವಶರಣನು ತಿಳಿದು ನೋಡಿ ಕಂಡು ಆರುನೆಲೆಯ ನಿಚ್ಚಣಿಗೆಯ ಆ ತರುಲತೆಗೆ ಸೇರಿಸಿ ಜ್ಞಾನ ಕ್ರೀಗಳೆಂಬ ದೃಢದಿಂದೇರಿ ನಾಲ್ಕೆಲೆಯ ಪೀತವರ್ಣದ ಹಣ್ಣ ಸುಚಿತ್ತವೆಂಬ ಹಸ್ತದಲ್ಲಿ ಪಿಡಿದು ಆರೆಲೆಯ ನೀಲವರ್ಣದ ಹಣ್ಣ ಸುಬುದ್ಧಿಯೆಂಬ ಹಸ್ತದಲ್ಲಿ ಪಿಡಿದು ಹತ್ತೆಲೆಯ ಸ್ಫಟಿಕವರ್ಣದ ಹಣ್ಣ ನಿರಹಂಕಾರವೆಂಬ ಹಸ್ತದಲ್ಲಿ ಪಿಡಿದು ಹನ್ನೆರೆಡೆಲೆಯ ಸುವರ್ಣವರ್ಣದ ಹಣ್ಣ ಸುಮನನೆಂಬ ಹಸ್ತದಲ್ಲಿ ಪಿಡಿದು ಹದಿನಾರೆಲೆಯ ಮಿಂಚುವರ್ಣದ ಹಣ್ಣ ಸುಜ್ಞಾನವೆಂಬ ಹಸ್ತದಲ್ಲಿ ಪಿಡಿದು ಆಸನಸ್ಥಿರವಾಗಿ ಕಣ್ಮುಚ್ಚಿ ಜ್ಞಾನಚಕ್ಷುವಿನಿಂ ನಿಟ್ಟಿಸಿ ಕಟ್ಟಕ್ಕರಿಂ ನೋಡಿ ರೇಚಕ ಪೂರಕ ಕುಂಭಕಂಗೈದು ಪೆಣ್ದುಂಬಿಯ ನಾದ ವೀಣಾನಾದ ಘಂಟನಾದ ಭೇರೀನಾದ ಮೇಘನಾದ ಪ್ರಣವನಾದ ದಿವ್ಯನಾದ ಸಿಂಹನಾದಂಗಳಂ ಕೇಳಿ ಹರುಷಂಗೊಂಡು ಆ ಫಲಂಗಳಂ ಮನವೆಂಬ ಹಸ್ತದಿಂ ಮಡಿಲುದುಂಬಿ ಮಾಯಾಕೋಲಾಹಲನಾಗಿ ಪಂಚಭೂತಂಗಳ ಸಂಚವ ಕೆಡಿಸಿ ದಶವಾಯುಗಳ ಹೆಸಗೆಡಿಸಿ ಅಷ್ಟಮದಂಗಳ ಹಿಟ್ಟುಗುಟ್ಟಿ ಅಂತಃಕರಣಂಗಳ ಚಿಂತೆಗೊಳಗುಮಾಡಿ ಮೂಲಹಂಕಾರವ ಮುಂದುಗೆಡಿಸಿ ಸಪ್ತವ್ಯಸನಂಗಳ ತೊತ್ತಳದುಳಿದು ಜ್ಞಾನೇಂದ್ರಿಯಂಗಳ ನೆನಹುಗೆಡಿಸಿ ಕರ್ಮೇಂದ್ರಿಯಂಗಳ ಕಾಲಮುರಿದು ತನ್ಮಾತ್ರೆಯಂಗಳ ತೋಳಕೊಯ್ದು, ಅರಿಷಡ್ವರ್ಗಂಗಳ ಕೊರಳನರಿದು ಸ್ಫಟಿಕದ ಪುತ್ಥಳಿಯಂತೆ ನಿಜಸ್ವರೂಪಮಾಗಿ- ಎರಡೆಸಳ ಕಮಲಕರ್ಣಿಕಾಗ್ರದಲ್ಲಿಪ್ಪ ಪರಬ್ರಹ್ಮದ ಶ್ವೇತಮಾಣಿಕ್ಯವರ್ಣದ ದ್ವಿಪಾದಮಂ ಸುಜ್ಞಾನವೆಂಬ ಹಸ್ತದಲ್ಲಿ ಪಿಡಿದು ಓಂಕಾರವೆಂಬ ಮಂತ್ರದಿಂದ ಸಂತೈಸಿ ನೀರ ನೀರು ಕೂಡಿದಂತೆ ಪರಬ್ರಹ್ಮವನೊಡಗೂಡಿ ಆ ಪರಬ್ರಹ್ಮವೆ ತಾನೆಯಾಗಿ ಬ್ರಹ್ಮರಂಧ್ರವೆಂಬ ಶಾಂಭವಲೋಕದಲ್ಲಿಪ್ಪ ನಿಷ್ಕಲ ಪರಬ್ರಹ್ಮದ ನಿರಾಕಾರಪಾದಮಂ ನಿರ್ಭಾವವೆಂಬ ಹಸ್ತದಿಂ ಪಿಡಿದು ಪಂಚಪ್ರಸಾದವೆಂಬ ಮಂತ್ರದಿಂ ಸಂತೈಸಿ ಕ್ಷೀರಕ್ಷೀರವ ಕೂಡಿದಂತೆ ನಿಷ್ಕಲಬ್ರಹ್ಮವನೊಡಗೂಡಿ ಆ ನಿಷ್ಕಲಬ್ರಹ್ಮವೇ ತಾನೆಯಾಗಿ ಮೂರುಮಂಟಪದ ಮಧ್ಯದ ಕುಸುಮಪೀಠದಲ್ಲಿಪ್ಪ ಶೂನ್ಯಬ್ರಹ್ಮದ ಶೂನ್ಯಪಾದಮಂ ನಿಷ್ಕಲವೆಂಬ ಹಸ್ತದಿಂ ಪಿಡಿದು ಕ್ಷಕಾರವೆಂಬ ಮಂತ್ರದಿಂ ಸಂತೈಸಿ ಘೃತಘೃತವ ಕೂಡಿದಂತೆ ಶೂನ್ಯಬ್ರಹ್ಮವನೊಡಗೂಡಿ ಆ ಶೂನ್ಯಬ್ರಹ್ಮವೇ ತಾನೆಯಾಗಿ- `ನಿಶಬ್ದಂ ಬ್ರಹ್ಮ ಉಚ್ಯತೇ' ಎಂಬ ಒಂಬತ್ತು ನೆಲೆಯ ಮಂಟಪದೊಳಿಪ್ಪ ನಿರಂಜನಬ್ರಹ್ಮದ ನಿರಂಜನಪಾದಮಂ ಶೂನ್ಯವೆಂಬ ಹಸ್ತದಿಂ ಪಿಡಿದು ಹ್ರೂಂಕಾರವೆಂಬ ಮಂತ್ರದಿಂ ಸಂತೈಸಿ ಬಯಲ ಬಯಲು ಬೆರಸಿದಂತೆ ನಿರಂಜನಬ್ರಹ್ಮವೇ ತಾನೆಯಾಗಿ- ಮಹಾಗುರು ಸಿದ್ಧಲಿಂಗಪ್ರಭುವಿನ ಗರ್ಭಾಬ್ಧಿಯಲ್ಲಿ ಜನಿಸಿದ ಬಾಲಕಿಯಯ್ಯ ನಾನು. ಎನ್ನ ಹೃದಯಕಮಲೆಂಟು ಮಂಟಪದ ಚತುಷ್ಪಟ್ಟಿಕಾ ಮಧ್ಯದ ಪದ್ಮಪೀಠದಲ್ಲಿ ಎನ್ನ ತಂದೆ ಸುಸ್ಥಿರವಾಗಿ ಎನಗೆ ಷಟ್ಸ ್ಥಲಮಾರ್ಗ-ಪುರಾತರ ವಚನಾನುಭಾವ- ಭಕ್ತಿ ಜ್ಞಾನ ವೈರಾಗ್ಯವೆಂಬ ಜೇನುಸಕ್ಕರೆ ಪರಮಾಮೃತವ ತಣಿಯಲುಣಿಸಿದನಯ್ಯ. ಆ ಜೇನುಸಕ್ಕರೆ ಪರಮಾಮೃತವ ತಣಿಯಲುಣಿಸಲೊಡನೆ ಎನ್ನ ಬಾಲತ್ವಂ ಕೆಟ್ಟು ಯೌವನಂ ಬಳೆದು ಬೆಡಗು ಕುಡಿವರಿದು ಮೀಟು ಜವ್ವನೆಯಾದೆನಯ್ಯ ನಾನು. ಎನಗೆ ನಿಜಮೋಕ್ಷವೆಂಬ ಮನ್ಮಥವಿಕಾರವು ಎನ್ನನಂಡಲೆದು ಆಳ್ದು ನಿಂದಲ್ಲಿ ನಿಲಲೀಸದಯ್ಯ. ಅನಂತಕೋಟಿ ಸೋಮಸೂರ್ಯ ಪ್ರಕಾಶವನುಳ್ಳ ಪರಂಜ್ಯೋತಿಲಿಂಗವೆ ಎನಗೆ ಶಿವಾನಂದ ಭಕ್ತಿಯೆಂಬ ತಾಲಿಬಂದಿಯ ಕಟ್ಟು ಸುಮಂತ್ರವಲ್ಲದೆ ಕುಮಂತ್ರವ ನುಡಿಯೆನೆಂಬ ಕಂಠಮಾಲೆಯಂ ಧರಿಸು. ಅರ್ಪಿತವಲ್ಲದೆ ಅನರ್ಪಿತವ ಪರಿಮಳಿಸೆನೆಂಬ ಮೌಕ್ತಿಕದ ಕಟ್ಟಾಣಿ ಮೂಗುತಿಯನಿಕ್ಕು. ಸುಶಬ್ಧವಲ್ಲದೆ ಅಪಶಬ್ದವ ಕೇಳೆನೆಂಬ ರತ್ನದ ಕರ್ಣಾಭರಣಂಗಳಂ ತೊಡಿಸು. ಶರಣತ್ವವನಲ್ಲದೆ ಜೀವತ್ವವನೊಲ್ಲೆನೆಂಬ ತ್ರಿಪುಂಡ್ರಮಂ ಧರಿಸು. ಕ್ರೀಯಲ್ಲದೆ ನಿಷ್ಕಿ ್ರೀಯ ಮಾಡೆನೆಂಬ ಮೌಕ್ತಿಕದ ಬಟ್ಟನಿಕ್ಕು. ನಿಮ್ಮವರಿಗಲ್ಲದೆ ಅನ್ಯರಿಗೆರಗೆನೆಂಬ ಕನಕಲತೆಯ ಬಾಸಿಂಗಮಂ ಕಟ್ಟು. ಸಮ್ಯಜ್ಞಾನವಲ್ಲದ ಅಜ್ಞಾನವ ಹೊದ್ದೆನೆಂಬ ನವ್ಯದುಕೂಲವನುಡಿಸು. ಲಿಂಗಾಣತಿಯಿಂದ ಬಂದುದನಲ್ಲದೆ ಅಂಗಗತಿಯಿಂದ ಬಂದುದಂ ಮುಟ್ಟೆನೆಂಬ ರತ್ನದ ಕಂಕಣವಂ ಕಟ್ಟು. ಶರಣಸಂಗವಲ್ಲದೆ ಪರಸಂಗಮಂ ಮಾಡೆನೆಂಬ ಪರಿಮಳವಂ ಲೇಪಿಸು. ಶಿವಪದವಲ್ಲದೆ ಚತುರ್ವಿಧಪದಂಗಳ ಬಯಸೆನೆಂಬ ಹಾಲು ತುಪ್ಪಮಂ ಕುಡಿಸು. ಪ್ರಸಾದವಲ್ಲದೆ ಬ್ಥಿನ್ನರುಚಿಯಂ ನೆನೆಯೆನೆಂಬ ತಾಂಬೂಲವನಿತ್ತು ಸಿಂಗರಂಗೆಯ್ಯ. ನಿನ್ನ ಕರುಣಪ್ರಸಾದವೆಂಬ ವಸವಂತ ಚಪ್ಪರದಲ್ಲಿ ಪ್ರಮಥಗಣಂಗಳ ಮಧ್ಯದಲ್ಲಿ ಎನ್ನ ಮದುವೆಯಾಗಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಬೀಜದೊಳಗಣ ವೃಕ್ಷದ ಹಣ್ಣ ಅದನಾರು ಮೆಲಬಹುದು ? ಸಸಿಯೊಳಗಣ ಲತೆ ಪರ್ಣ ತಲೆದೋರದ ನಸುಗಂಪಿನ ಕುಸುಮವ ಅದಾರು ಮುಡಿವರು ? ಇಂತೀ ಅರಿವಿನ ಅರಿವ ಕುರುಹಿಟ್ಟು ಕೂಡುವನೆ ಲಿಂಗಾಂಗಿ ? ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನನಲ್ಲಿ ಇದು ಸ್ವಾನುಭಾವಿಯ ಸನ್ನದ್ಧಸ್ಥಲ.
--------------
ಮೋಳಿಗೆ ಮಹಾದೇವಿ
ಹಣ್ಣ ಹಿಡಿದ ಬಾಲಕಂಗೆ ಬೆಲ್ಲವ ಕೊಟ್ಟೇನು ಹಣ್ಣ ತಾ ಎಂಬಂತೆ, ಮಣ್ಣು ಮೂರನು ಹಿಡಿದ ಭಕ್ತಂಗೆ ಮುಕ್ಕಣ್ಣನ ಪದವಿ ಕೊಟ್ಟೇವೆಂಬ ತೆರನಂತೆ, ಗುರು-ಲಿಂಗ-ಜಂಗಮರು ಬೇಡುವರಲ್ಲದೆ, ತಮ್ಮಿಚ್ಛೆಗೆ ಕೈಯಾನುವರೆ ಕಪಿಲಸಿದ್ಧಮಲ್ಲಿಕಾರ್ಜುನಾ?
--------------
ಸಿದ್ಧರಾಮೇಶ್ವರ
ಭಕ್ತ ಭೂಮಿಯಾಗಿ, ಜಂಗಮ ಬೀಜವಾಗಿ, ಆ ಜಂಗಮದರಿವು ಅಪ್ಪುವಾಗಿ, ಆ ಸುಭೂಮಿಯ ಬೀಜದ ಮೇಲೆ ಸುರಿಯೆ, ಆ ಭೂಮಿ ಶೈತ್ಯವಾಗಿ, ಆ ಬೀಜದ ಒಳಗು ಒಡೆದು ಅಂಕುರ ತಲೆದೋರಿ, ಭಕ್ತಿ ಜ್ಞಾನ ವೈರಾಗ್ಯವೆಂಬ ಮರ ಶಾಖೆ ಫಲ ಬಲಿದು ತುರೀಯ ನಿಂದು ಹಣ್ಣಾಯಿತ್ತು. ಆ ಹಣ್ಣ ಮೇಲಣ ಜಡವ ಕಳೆದು ಒಳಗಳ ಬಿತ್ತ ಮುಂದಕ್ಕೆ ಹುಟ್ಟದಂತೆ ಹಾಕಿ ಉಭಯದ ಮಧ್ಯದಲ್ಲಿ ನಿಂದ ಸವಿಸಾರವ ಸದಾಶಿವಮೂರ್ತಿಲಿಂಗಕ್ಕೆ ಅರ್ಪಿತವ ಮಾಡು.
--------------
ಅರಿವಿನ ಮಾರಿತಂದೆ
ಬೇರು ಇಲ್ಲದ ಮರ ಹೋಗಿ ಆದಿಯ ಸೇರಿತ್ತಯ್ಯ, ಆ ಮರಕ್ಕೆ ಐದು ಕೊಂಬೆಗಳು ಬೆಳೆದಿರ್ಪವು ನೋಡಾ. ಬ್ರಹ್ಮವೊಂದನೇರಿದ, ವಿಷ್ಣುವೊಂದನೇರಿದ, ರುದ್ರವೊಂದನೇರಿದ, ಈಶ್ವರನೊಂದನೇರಿದ, ಸದಾಶಿವನೊಂದನೇರಿದ- ಈ ಐದು ಕೊಂಬೆಗಳ ಮೆಟ್ಟಿ ತುಟ್ಟತುದಿಯಲೊಂದು ಬಟ್ಟಬಯಲ ಹಣ್ಣಾಗಿಪ್ಪುದು ನೋಡಾ ! ಆ ಹಣ್ಣ ಸವಿಯಲೊಡನೆ, ಹಣ್ಣಿನ ಒಡೆಯ ಬಂದು ಸವಿದಾತನ ನುಂಗಿದ ನೋಡಾ, ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಒತ್ತಿ ಹಣ್ಣ ಮಾಡಿದಡೆ ಅದೆತ್ತಣ ರುಚಿಯಪ್ಪುದೊ? ಕಾಮಿಸಿ ಕಲ್ಪಿಸಿ ಭಾವಿಸಿದಡೆ ಅದೆ ಭಂಗ. ಭಾವಿಸುವ ಭಾವನೆಗಿಂದ ಸಾವು[ದೆ]ಲೇಸು ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಗುರುಚರಮೂರ್ತಿ ಪೂಜಿಸಿಕೊಂಬಲ್ಲಿ ತಮ್ಮ ವಿವರವ ತಾವರಿಯಬೇಕು. ಹೆಣ್ಣು ಹೊನ್ನು ಮಣ್ಣು ಹೊರಗೆಂದು ಕೆಲವರಿಗೆ ಹೇಳಿ ಗನ್ನದಿಂದ ತಾವು ಗಳಿಸಿ ಕೂಡುವುದು, ಅದು ತಾನೆ ಅನ್ಯಾಯವಲ್ಲವೆ? ಬಿರಿದ ಕಟ್ಟಿದ ಬಂಟ ಭಾಷೆಗೆ ತಪ್ಪಿದಡೆ, ರಾಜನ ಮುಖಕ್ಕೆ ಏರಿದಡೆ, ಅದೆ ಭಂಗ. ಇಂತಿವನರಿಯದೆ ಮೂಗ ಕೊಯಿದು ಮಾರಿ, ಹಣ್ಣ ಮೆಲುವ ಅಣ್ಣಗಳಿಗೇಕೆ ಗುರುಚರಸ್ಥಲ? ಇಂತಿವರೆಲ್ಲರು ಸದಾಶಿವಮೂರ್ತಿಲಿಂಗಕ್ಕೆ ಹೊರಗು.
--------------
ಅರಿವಿನ ಮಾರಿತಂದೆ
ಹಣ್ಣ ಮೆದ್ದ ಬಳಿಕ ಆ ಮರನನಾರು ತರಿದಡೇನು ? ಹೆಣ್ಣ ಬಿಟ್ಟ ಬಳಿಕ ಆಕೆಯನಾರು ಕೂಡಿದಡೇನು ? ಮಣ್ಣ ಬಿಟ್ಟ ಬಳಿಕ ಆ ಕೆಯ್ಯನಾರು ಉತ್ತಡೇನು ? ಚೆನ್ನ ಮಲ್ಲಿಕಾರ್ಜುನನರಿಯದ ಬಳಿಕ ಆ ಕಾಯವ ನಾಯಿ ತಿಂದಡೇನು, ನೀರು ಕುಡಿದಡೇನು?
--------------
ಅಕ್ಕಮಹಾದೇವಿ
ತುಟ್ಟತುದಿಯಲೊಂದು ಬಟ್ಟಬಯಲಾದ ಹಣ್ಣ ಮುಟ್ಟಿ ನೋಡುವವರ ನಾನಾರನೂ ಕಾಣೆನಯ್ಯ. ವೇದ ಶಾಸ್ತ್ರ ಪುರಾಣದಲ್ಲೂ ಕಂಡ ಕಾಣಿಕೆಯಿಲ್ಲ, ಅದು ಶ್ರುತಜ್ಞಾನಸಮ್ಮತ. ಹೇಗೆಂದರೆ: ಗುರು ನಿರೂಪಣದಿಂದ ಕಂಡದುದೆ ಕಾಣಿಕೆ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಹೂ-ಮಿಡಿಯ ಹರಿದು ಹಣ್ಣ ಮಾಡಿಹೆನೆಂದಡೆ ಫಲಕಾರ್ಯಂಗಳಪ್ಪುವೆ ದೇವಾ ? ಶಶಿಧರನಟ್ಟಿದ ಬೆಸನದೊಳಗೆ ಎವೆ ಮಾತ್ರ ಪ್ರಮಾಣವೆ ಪೂರೈಸಲು ? ಲಿಂಗಪ್ರಾಣ ಪ್ರಾಣಲಿಂಗದ ಭೇದವ ನೆಟ್ಟನೆ ತಿಳಿದಲ್ಲದೆ, ಸಂಗಮನಾಥ `ನೀ ಬಾರಾ' ಎಂದು ಎತ್ತಕೊಳ್ಳನು. ಕೂಡಲಚೆನ್ನಸಂಗಯ್ಯಂಗೆ ಸವೆಯದ ಮುನ್ನ ಸಯವಾಗಲುಂಟೆ ? ಹೇಳಾ ಸಂಗನಬಸವಣ್ಣಾ.
--------------
ಚನ್ನಬಸವಣ್ಣ
ಪರಶಕ್ತಿ ಅದಿಯೈಯ್ದ ಬೆರೆಸಿ ಬೆರೆಯದೆ ಬ್ರಹ್ಮವನರಿದೆನೆಂಬ ಯೋಗಿ ಕೇಳಾ. ಅದು ಸಗುಣದಲ್ಲಿ ತಾತ್ಪರ್ಯ ಅದು ನಿಷ್ಕಳದಲ್ಲಿ ನಿತ್ಯ ಅರಿದೆನೆಂಬ ಯೋಗಿ ಕೇಳಾ. ಅದು ಅನಾಹತದಲ್ಲಿ ಆನಂದ, ಅದು ಭಕ್ತಿಜ್ಞಾನವೈರಾಗ್ಯವಂ ಕೂಡಿದ ಏಕಮತ ಅದು ಪದ ನಾಲ್ಕು ಮೀರಿದ ಮಹಾಮತ. ಅದು ಉಂಡುದನುಣ್ಣದು, ಅದು ಬಂದಲ್ಲಿ ಬಾರದು, ಅದು ಸಕಳದಲ್ಲಿಯೂ ತಾನೆ ನಿಷ್ಕಳದಲ್ಲಿಯೂ ತಾನೆ, ಅದು ಪ್ರಾಪಂಚಿಕದಲ್ಲಿಯೂ ತಾನೆ, ಅದು ತಾತ್ಪರ್ಯದಲ್ಲಿಯೂ ತಾನೆ. ಅದು ಸಕಲ ಸರ್ವದ ನಿಷ್ಕಳದ ನಿರ್ಮಳದ ಮದದ ಮಾತ್ಸರ್ಯದ ಬಣ್ಣ ಹಲವರಿದ ಅತಿಗಳೆದ ಪರಮಸೀಮೆಯ ಅರಿದೆನೆಂಬ ಯೋಗಿ. ಅದು ಒಂದರಲ್ಲಿ ನಿತ್ಯ, ಎರಡರಲ್ಲಿ ತಾತ್ಪರ್ಯ, ಮೂರರಲ್ಲಿ ಮುಕ್ತ, ನಾಲ್ಕರಲ್ಲಿ ಕ್ರೋದ್ಥಿ, ಐದರಲ್ಲಿ ಆನಂದ, ಆರರಲ್ಲಿ ತಾನೆ, ಇಪ್ಪತ್ತೈದು ಪಟ್ಟಣದ ತಾತ್ಪರ್ಯಂಗಳನ್ನರಿತು ಮೂವತ್ತಾರು ವೃಕ್ಷಂಗಳ ಮೇಲೆ ಹಣ್ಣೊಂದೆ ಆಯಿತ್ತು ಕಾಣಾ. ಆ ಹಣ್ಣು ಹಣಿತು, ತೊಟ್ಟುಬಿಟ್ಟು ನಿರ್ಮಳ ಜ್ಞಾನಾಮೃತಂ ತುಂಬಿ ಭೂಮಿಯ ಮೇಲೆ ಬಿದ್ದಿತು. ಆ ಬಿದ್ದ ಭೂಮಿ ಪರಲೋಕ. ಆ ಹಣ್ಣ ಗುರು ಕರುಣವುಳ್ಳವಂಗಲ್ಲದೆ ಮೆಲಲಿಲ್ಲ. ದೀಕ್ಷತ್ರಯದಲ್ಲಿ ಅನುಮಿಷನಾದಂಗಲ್ಲದೆ ಆ ಲೋಕದಲ್ಲಿರಲಿಲ್ಲ. ಆ ಲೋಕದಲ್ಲಿದ್ದವಂಗೆ ಅಜಲೋಕದ ಅಮೃತವನು ನಿತ್ಯವು ಸೇವಿಸಿ ಸತ್ಯಮುಕ್ತನಾಗಿ ಬೇಡಿದವಕ್ಕೆ ಬೇಡಿದ ಪರಿಯ ಕೇವಲವನಿತ್ತು ತಾನು ಕಾಂಕ್ಷೆಗೆ ಹೊರಗಾಗಿ ಕಾಲನ ಕಮ್ಮಟಕ್ಕೆ ಕಳವಣ್ಣವಾಗಿ ನಿತ್ಯಸಂಗಮಕ್ಕೆ ಸಂಯೋಗವಾಗಿ ಕಪಿಲಸಿದ್ಧ ಮ್ಲಕಾರ್ಜುನಯ್ಯನೆಂಬ ಅನಾಹತ ಮೂಲಗುರುವಾಗಿ, ಎನ್ನನಿಷ್ಟಕ್ಕೆ ಪ್ರಾಪ್ತಿಸಿದನಯ್ಯಾ.
--------------
ಸಿದ್ಧರಾಮೇಶ್ವರ
ವನಾಂತರದಲ್ಲಿ ಕೋಗಿಲೆ ಸ್ವರಗೈದಿತೆಂದು ಕುಂಬ್ಥಿನಿಯ ಮೇಲೆ ಕಾಗಿ ತಾ ಕರೆದಂತೆ, ಅರಸಿ ಮಂಚವನೇರಿದಳೆಂದು ಕಸ ನೀರು ಹೊರುವ ದಾಸಿ ತಾ ಹೊರಸನೇರುವಂತೆ, ಮಹಾರಾಜಕುಮಾರನು ಆನೆಯನೇರಿದನೆಂದು ಮಣ್ಣು ಹೊರುವ ಉಪ್ಪರಿಗನಮಗ ತಾ ಕೋಣ[ನ]ನೇರುವಂತೆ, ಮಹಾವೀರಕುಮಾರ ಮಹಾತೇಜಿಯನೇರಿದನೆಂದು ಮೈಲಿಗೆಯ ತೊಳೆಯುವ ಮಡಿವಾಳನಮಗ ತಾ ಮೋಳಿಗೆಯ ಹೇರುವ ಕತ್ತೆಯನೇರುವಂತೆ, ಬಾಲಹನುಮನು ಲಂಕೆಗೆ ಹಾರಿದನೆಂದು ಒಂದು ಮರುಳಕೋತಿ ತಾ ಪರ್ವತವನೇರಿ ಕೆಳಕ್ಕೆ ಬಿದ್ದಂತೆ, ಮಹಾಮಲೆಯೊಳಗೆ ಒಂದು ಮಹಾವ್ಯಾಘ್ರನು ಘುಡುಘುಡಿಸಿ ಲಂಘಿಸಿ ಒಂದು ಪಶುವಿಗೆ ಹಾರಿತೆಂದು ಮಹಾ ಶೀಗರಿಮೆಳೆಯೊಳಗೊಂದು ಮರುಳ ನರಿ ತಾ ಒದರಿ ಹಲ್ಲು ಕಿಸಿದು ಕಣ್ಣು ತೆರೆದೊಂದು ಇಲಿಗೆ ತಾ ಲಂಘಿಸಿ ಹಾರುವಂತೆ. ಇಂತೀ ದೃಷ್ಟಾಂತದಂತೆ ಆದಿ ಆನಾದಿಯಿಂದತ್ತತ್ತಲಾದ ಘನಮಹಾಲಿಂಗದೊಳಗೆ ಜ್ಯೋತಿ ಜ್ಯೋತಿ ಕೂಡಿದಂತೆ, ಬೆರಸದ ಶಿವಶರಣರು ಹಾಡಿದ ವಚನವ ಶಿವಾಂಶಿಕರಾದ ಸಜ್ಜೀವಾತ್ಮರು ಹಾಡಿ ನಿರ್ವಯಲಾದರೆಂದು ತ್ರಿಭುವನ ಮೊದಲಾದ ಚತುರ್ದಶಭುವನದಲ್ಲಿರುವ ದೇವ ದಾನವ ಮಾನವರು ಮೊದಲಾದ ಜೀವಾತ್ಮರು ಇಟ್ಟೆಯ ಹಣ್ಣ ನರಿ ತಾ ತಿಂದು ಪಿಟ್ಟೆಸಿಕ್ಕು ಬಾಯಿತೆರೆದು ಒದರುವಂತೆ ಏಕಲಿಂಗ ನಿಷ್ಠಾಪಾರಿಗಳ ವಚನವ ಮಲತ್ರಯವೆಂಬ ಇಟ್ಟೆಯಹಣ್ಣ ತಿಂದು ಪಿಟ್ಟೆಸಿಕ್ಕು ಬಾಯಿ ತೆರೆದು ಬೇನೆಹಾಯ್ದ ಕುರಿಯಂತೆ ಒದರಿ ಒದರಿ ಸತ್ತು ಭವದತ್ತ ಮುಖವಾಗಿ ಹೋದರಲ್ಲದೆ ಇವರು ಲಿಂಗೈಕ್ಯಗಳಾಗಲರಿಯರು ನೋಡೆಂದನಯ್ಯ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಪುಟ್ಟಿದ ಮರದಲ್ಲಿ ಹಾರಿದ ಪಕ್ಷಿ ತಲೆದೋರುತ್ತದೆ. ಆಗದ ಹಣ್ಣ ಕುಟುಕಿ ರಸ ತಾಗದೆ ನುಂಗುತ್ತದೆ. ಅದು ನಾಗರಿಕ ಪಕ್ಷಿ, ಹಾರಿಹೋಯಿತು. ಅದರಾಗತವನರಿ, ಆತ್ಮನಿರವ ನಿನ್ನ ನೀನೆ ತಿಳಿ ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಬೀಜವಿಲ್ಲದ ವೃಕ್ಷ, ಎಲೆಯಿಲ್ಲದ ಉಲುಹು, ಹೂವಿಲ್ಲದ ಪರಿಮಳ, ಕಾಯಿಲ್ಲದ ಹಣ್ಣು, ರಸವಿಲ್ಲದ ನವರುಚಿ ಮೆಲಬಲ್ಲವನಾರೊ ? ಕಾಲು ಕೈಯಿಲ್ಲದ, ಕಿವಿ ಮೂಗಿಲ್ಲದ ಹುಟ್ಟುಗುರುಡನು ಆ ಹಣ್ಣ ಮೂಗಿನಲ್ಲಿ ಮೆದ್ದನು. ಕಂಗಳಲ್ಲಿ ತೃಪ್ತಿಯಾಗಿ, ಕಿವಿಯಲ್ಲಿ ತೇಗಿ, ತಲೆಯಲ್ಲಿ ಲಿಂಗಕ್ಕರ್ಪಿಸಿ, ಆ ಪ್ರಸಾದವ ಬಾಯಿಂದ ಉಂಡು, ನಿಜಗುರು ಭೋಗಸಂಗನೊಳು ಒಚ್ಚತವೋದ ಶರಣರ ಇರವು, ಅರಳೆಲೆಯಸಿಂಗಾರದ ಸರಮಾಲೆಯ ಸರಕೆ ನವಪಸರವನಿಕ್ಕಿ ಮಾರುವ ಬಹುಭಾಷೆಗಳಿಗೆಂತು ಸಾಧ್ಯವಪ್ಪುದು ಹೇಳಯ್ಯಾ.
--------------
ಭೋಗಣ್ಣ
ಇನ್ನಷ್ಟು ... -->