ಅಥವಾ

ಒಟ್ಟು 350 ಕಡೆಗಳಲ್ಲಿ , 65 ವಚನಕಾರರು , 325 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಲ ನೆಲ ಅನಲ ಅನಿಲ ಮಿಕ್ಕಾದ ದೃಷ್ಟಂಗಳೆಲ್ಲವನೂ ನಿರೀಕ್ಷಿಸಿ ಸಾದ್ಥಿಸಿಕೊಂಡು ಶ್ರುತ ದೃಷ್ಟ ಅನುಮಾನಂಗಳಲ್ಲಿ ತಿಳಿದು, ಹಿಂದಣ ಮುಂದಣ ಸಂದೇಹವ ಹರಿದು ಮುಟ್ಟೂದು ಘಟಕ್ರಿಯಾಭೇದ ಮನಕ್ಕೆ ಮನೋಹರ ಸಂಕೇಶ್ವರ ಲಿಂಗವನರಿವುದಕ್ಕೆ.
--------------
ಕರುಳ ಕೇತಯ್ಯ
ಪಂಚಾಕ್ಷರಿಯ ಮಣಿಮಾಲೆಯಲ್ಲಿ ಸಂಚಿತ ಪ್ರಾರಬ್ಧ ಕರ್ಮವೆಂಬ ದಾರ ನಡುವೆ ಸಿಕ್ಕಿ, ಮಣಿಯ ತಿರುಗಾಡಿಸುತ್ತದೆ. ದಾರವ ಹರಿದು ಮಣಿಯ ದ್ವಾರವ ಮುಚ್ಚಿ ಉಲುಹಡಗಿ ನಿಲಬೇಕು, ಸದಾಶಿವಮೂರ್ತಿಲಿಂಗವನರಿವುದಕ್ಕೆ.
--------------
ಅರಿವಿನ ಮಾರಿತಂದೆ
ಪ್ರಾಣಲಿಂಗಸಂಬಂದ್ಥಿಯಾದ ಮಹಾತ್ಮನು ಅರಿಷಡ್ವರ್ಗಂಗಳರಿಯ, ಕ್ಷುತ್ತು ಪಿಪಾಸು ಶೋಕ ಮೋಹ ಜರೆ ಮರಣ ಗುಣತ್ರಯದೊಳೊಂದಿ ನಿಲ್ಲ. ತನುತ್ರಯ ಮಲತ್ರಯ ಈಷಣತ್ರಯ ಜೀವತ್ರಯ ಅವಸ್ಥಾತ್ರಯವೆಂಬ ಪಂಚದಶ ಮಾಯಾಪಟಲ ಹರಿದು ಮರೆದು ಮಹಾಘನ ಬೆಳಗಿನ ಸುಖವ ಸುಗ್ಗಿಯೊಳಿರ್ದು ಪ್ರಾಣಲಿಂಗವನರ್ಚಿಸುತ್ತಿಹನು ಭಕ್ತಿತ್ರಯಗೂಡಿ ಗುರುನಿರಂಜನ ಚನ್ನಬಸವಲಿಂಗದಲ್ಲಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಕಾಯವೆಂಬ ಕಲ್ಪಿತವ ಕಳೆದು, ಪ್ರಾಣವೆಂಬ ಸೂತಕವ ಹರಿದು, ನಿಜಭಕ್ತಿ ಸಾಧ್ಯವಾದಲ್ಲದೆ ಲಿಂಗಪರಿಣಾಮವನೆಯ್ದಿಸಬಾರದು (ವೇಧಿಸಬಾರದು ?) ಅನು ಮಾಡಿದೆ, ನೀವು ಕೈಕೊಳ್ಳಿ ಎಂದಡೆ ಅದೇ ಅಜಾÕನ. ನಮ್ಮ ಗುಹೇಶ್ವರಲಿಂಗಕ್ಕೆ ಕುರುಹಳಿದು ನಿಜ ಉಳಿದವಂಗಲ್ಲದೆ ಪದಾರ್ಥವ ನೀಡಬಾರದು ಕಾಣಾ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ಬಣ್ಣದ ಪುತ್ಥಳಿಯ ಮಾಡಿ ಸಲಹಿದರೆನ್ನ ನಮ್ಮಯ್ಯನವರು. ಕಾಯವನಳಿದವಳೆಂದು ಹೆಸರಿಟ್ಟರೆನಗೆ ಎಮ್ಮಯ್ಯನವರು. ವ್ರತವಳಿದ ಪ್ರಪಂಚಿ ಎಂದರೆನ್ನ ಎಮ್ಮಯ್ಯನವರು. ಸಂಸಾರ ಬಂಧವ ಹರಿದು ನಿಃಸಂಸಾರಿಯಾದೆನಯ್ಯ. ಸಂಗಯ್ಯ, ಎಮ್ಮಯ್ಯನವರ ಕರುಣದಿಂದ ಆನು ಪರಮ ಪ್ರಸಾದಿಯಾದೆನಯ್ಯ.
--------------
ನೀಲಮ್ಮ
ಧರೆಯಗಲದ ಹುಲ್ಲೆ ಹರಿದು ಮೇಯಿತ್ತ ಕಂಡೆ. ಬಲೆಯ ಬೀಸುವ ಗಂಡರಾರೂ ಇಲ್ಲ, ಹರಿದು ಹಿಡಿದಹೆನೆಂದಡೆ ತಲೆ ಕಾಣಬರುತ್ತಲಿದೆ. ಶಿರವ ಹಿಡಿದೆಹೆನೆಂಬವರಿನ್ನಾರೂ ಇಲ್ಲ. ಹರಿದಾಡುವ ಹುಲ್ಲೆಯ ಕಂಡು ಹಲವು ಬೇಳಾರ (ಬೆಳ್ಳಾರ?)ವ ಬಿಟ್ಟು, ಬೇಟೆಕಾರ ಬಲೆಯ ಬೀಸಿದಡೆ ಹುಲ್ಲೆಯಂಜಿ ಹೋಯಿತ್ತು. ಮರುಳುದಲೆಯಲ್ಲಿ ಹುಲ್ಲೆಯನೆಸೆದಯಬೇಕೆಂದು ಸರಳ ಬಿಟ್ಟು ಬಾಣವನೊಂದು ಕೈಯಲ್ಲಿ ಹಿಡಿದು (ಹಿಡಿವಡೆ?) ಹಳ್ಳಕೊಳ್ಳವ ದಾಂಟಿ ಗಟ್ಟಬೆಟ್ಟವ ಕಳೆದು ಅತ್ತ ಬಯಲ ಮರನ ತಾ ಮೊರೆಗೊಂಡಿತ್ತು. ಹತ್ತೆ ಸಾರಿದ ಮೃಗವ ತಾನೆಚ್ಚಡೆ ನಾರಿ ಹರಿದು ಬಿಲ್ಲು ಮುರಿದು ಹುಲ್ಲೆ ಸತ್ತಿತ್ತು. ಅದ ಕಿಚ್ಚಿಲ್ಲದ ನಾಡಿಗೊಯ್ದು ಸುಟ್ಟು ಬಾಣಸವ ಮಾಡಲು ಸತ್ತ ಹುಲ್ಲೆ ಕರಗಿ ಶಬ (ಸಬ?) ಉಳಿಯಿತ್ತು. ಗುಹೇಶ್ವರಾ ನಿಮ್ಮ ಶರಣ ಕಟ್ಟಿದಿರ ಬಾಣಸದ ಮನೆಗೆ ಬಂದನು.
--------------
ಅಲ್ಲಮಪ್ರಭುದೇವರು
ಅಲ್ಲಿಯಬಹುರೂಪ ಇಲ್ಲಿಗೆ ಬಂದಿತ್ತು. ಇಲ್ಲಿಯ ಬಹುರೂಪ ಎಲ್ಲಿ ಅಡಗಿತ್ತೋ? ಎನ್ನ ಬಹುರೂಪ ಬಲ್ಲವರಾರೋ ? ನಾದ ಹರಿದು ಸ್ವರವು ಸೂಸಿದ ಬಳಿಕ ಈ ಬಹುರೂಪ ಬಲ್ಲವರಾರೋ ? ರೇಕಣ್ಣಪ್ರಿಯ ನಾಗಿನಾಥನಲ್ಲಿ ಬಸವಣ್ಣನಿಂದ ಬದುಕಿತೀ ಲೋಕವೆಲ್ಲ.
--------------
ಬಹುರೂಪಿ ಚೌಡಯ್ಯ
ಎನ್ನಾತ್ಮನದೊಂದು ಅರಸುತನದ ಅನ್ಯಾಯವ ಕೇಳಯ್ಯ ಗುರುವೆ. ಪಂಚಭಕ್ಷ ್ಯ ಪರಮಾಮೃತವ ಸದಾ ದಣಿಯಲುಂಡು ಒಂದು ದಿನ ಸವಿಯೂಟ ತಪ್ಪಿದರೆ ಹಲವ ಹಂಬಲಿಸಿ ಹಲುಗಿರಿದು, ಎನ್ನ ಕೊಂದು ಕೂಗುತ್ತಿದೆ ನೋಡಾ. ಶ್ವಪಚನನುತ್ತಮನ ಕೂಡೆ ಸಂಕಲೆಯನಿಕ್ಕುವರೆ ಅಯ್ಯ?. ಕಲಸಿ ಕಲಸಿ ಕೈಬೆರಲು ಮೊಂಡಾದವು. ಅಗಿದಗಿದು ಹಲ್ಲುಚಪ್ಪಟನಾದವು. ಉಂಡುಂಡು ಬಾಯಿ ಜಡ್ಡಾಯಿತು. ಹೇತು ಹೇತು ಮುಕುಳಿ ಮುರುಟುಗಟ್ಟಿತ್ತು. ಸ್ತ್ರೀಯರ ಕೂಡಿಕೂಡಿ ಶಿಶ್ನ ಸವೆದು ಹೋಯಿತ್ತು. ತನುಹಳದಾಗಿ ಅಲ್ಲಲ್ಲಿಗೆ ಕಣ್ಣು ಪಟ್ಟಿತ್ತು. ಮನ ಹೊಸದಾಗಿ ಹನ್ನೆರಡುವರ್ಷದ ರಾಜಕುಮಾರನಾದೆನು. ಇನ್ನೇವೆನಿನ್ನೇವೆನಯ್ಯ ಎನ್ನ ಕೇಡಿಂಗೆ ಕಡೆಯಿಲ್ಲ. ಕಾಯವಿಕಾರವೆಂಬ ಕತ್ತಲೆ ಕವಿಯಿತು. ಮನೋವಿಕಾರವೆಂಬ ಮಾಯೆ ಸೆರೆವಿಡಿದಳು. ಇಂದ್ರಿಯವಿಕಾರವೆಂಬ ಹುಚ್ಚುನಾಯಿಗಳು ಕಚ್ಚಿ ಕಚ್ಚಿ ಒದರುತ್ತಿವೆ. ಕಾಮ ವಿಕಾರವೆಂಬ ಕಾಳರಕ್ಕಸಿ ಅಗಿದಗಿದು ನುಂಗುತಿಹಳು. ಕಾಯಾಲಾಗದೆ ದೇವ?. ಸಾವನ್ನಬರ ಸರಸವುಂಟೆ ಲಿಂಗಯ್ಯ?. ಅನ್ಯಸಮಯದ ಗುಮ್ಮಟನ ಕೈವಿಡಿದೆತ್ತಿಕೊಂಡೆ. ನಿನ್ನ ಸಮಯದ ಶಿಶು ಬಾವಿಯಲ್ಲಿ ಬೀಳ್ವುದ ನೋಡುತ್ತಿಪ್ಪರೆ ಕರುಣಿ?. ಮುಕ್ತಿಗಿದೇ ಪಯಣವೋ ತಂದೆ?. ನೀನಿಕ್ಕಿದ ಮಾಯಾಸೂತ್ರಮಂ ಹರಿದು, ದಶೇಂದ್ರಿಯಂಗಳ ಗುಣವ ನಿವೃತ್ತಿಯಂ ಮಾಡಿ, ಅಂಗಭೋಗ-ಆತ್ಮಭೋಗಂಗಳನಡಗಿಸಿ, ಲಿಂಗದೊಳು ಮನವ ನೆಲೆಗೊಳಿಸಿ, ಎನ್ನ ಪಟದೊಳಗಣ ಚಿತ್ರದಂತೆ ಮಾಡಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಮಾರ್ಜಾಲನ ಹೃದಯದಲ್ಲಿ ಮೂಷಕ ಮನೆಯ ಮಾಡಿ ಇದ್ದಿತ್ತು. ಅದಕ್ಕೆ ಮಣಿಮಾಡಂಗಳಿಂದ ಆಶ್ರಯವೊಂದು ಬಾಗಿಲು ಬೇರೆ. ಅದಕ್ಕೆ ಹೋಗಿ ಆಡುವ ನಾಟಕಸಾಲೆ. ಪವನನೆಂಬ ಸೂಳೆ ಅಘಟದಿಂದ ಆಡುತ್ತಿರಲಾಗಿ, ಕಾಲುಜಾರಿ ನೆಲಕ್ಕೆ ಬಿದ್ದಳು. ಬಿದ್ದ ಘಾತಕ್ಕೆ ಯೋನಿ ಒಡೆಯಿತ್ತು, ಮೊಲೆ ಹರಿದು, ಕಿವಿ ಕಿತ್ತು, ಕಣ್ಣು ಹಿಂಚುಮುಂಚಾಯಿತ್ತು. ನೋಡುವ ಅಣ್ಣಗಳ ಬಯಕೆ ಹರಿಯಿತ್ತು. ಯೋನಿ ಕಿತ್ತಲ್ಲಿ ಕೂಟಕ್ಕೆ ಸುಖವಿಲ್ಲ, ನೋಟಕ್ಕೆ ಬೆಂಬಳಿಯಿಲ್ಲ. ಪವನನ ಅಘಟ ಹೋಯಿತ್ತು, ಕಾಲನ ಕಮಟಕ್ಕೆ. ನೀ ಅಲೇಖನಾದ ಶೂನ್ಯ, ಇವರಾಟದ ಬೆಂಬಳಿಯ ಬಿಡಿಸು, ಕಲ್ಲಿನೊಳಗಿಂದ ಇತ್ತ ಬಾರಯ್ಯಾ.
--------------
ವಚನಭಂಡಾರಿ ಶಾಂತರಸ
ಓಡ ಕುದುರೆಯ ಮೇಲೆ ಮಸಿಯ ಹಲ್ಲಣವ ಹಾಕಿ, ಬಸಲೆಯ ಹಂಬ ಬಾಯಿಗೆ ಕಟ್ಟಿ, ದೆಸೆವರಿವ ಅಸುರಾವುತ ಚೊಲ್ಲೆಹದ ಬಲ್ಲೆಹವ ಹಿಡಿದು, ಮುಗುಳುನಗೆಯವಳಲ್ಲಿ ಏರಿ ತಿವಿದ. ಚೊಲ್ಲೆಹದ ಬಲ್ಲೆಹ ಮುರಿದು, ಓಡಿನ ಕುದುರೆ ಒಡೆದು, ಮಸಿಯ ಹಲ್ಲಣ ನುಗ್ಗುನುಸಿಯಾಗಿ, ಬಸಲೆಯ ಬಾಯಕಟ್ಟು ಹರಿದು, ಅಸುರಾವುತ ಅವಳ ಕಿಸಲೆಯ ರಸಕ್ಕೊಳಗಾದ. ಅದೇತರಿಂದ ಹಾಗಾದನೆಂಬುದ ನೀನರಿ, ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಕರ್ಮವೆಂಬ ಕತ್ತಲೆಯಲ್ಲಿ ಒಬ್ಬ ಮಾನವನು ವರ್ಮಗೆಟ್ಟು ಬಿದ್ದಿರುವುದ ಕಂಡೆನಯ್ಯ. ಧರ್ಮವೆಂಬ ಗುರುವು ನಿರ್ಮಳವೆಂಬ ಚಬಕ ಹಾಕಲು, ಕರ್ಮವೆಂಬ ಕತ್ತಲೆ ಹರಿದು, ವರ್ಮವೆಂಬ ದಾರಿಯನೇರಿ, ಧರ್ಮವೆಂಬ ಗುರುವ ಕೂಡಿ ನಿರವಯವೆಂಬ ಕರಸ್ಥಲದಲ್ಲಿ ನಿಂದಿರುವ ಬೆಡಗ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಉಲಿವ ಉಯ್ಯಲೆಯ ಹರಿದು ಬಂದೇರಲು, ತಾಗದೆ ತೂಗುವುದು, ಭವಸಾಗರ ಮರಳಿ ಬಾರದಂತೆ ! ಹಂಸೆಯ ಮೇಲೆ ತುಂಬಿ ಕುಳ್ಳಿರ್ದು ಸ್ವರ ಗೆಯ್ಯುವ ಘೋಷವಿದೇನೊ ? ಆತನಿರ್ದ ಸರ ಹರಿಯದೆ ಇದ್ದಿತ್ತು. ದೇಹಿಗಳೆಲ್ಲ ಅರಿವರೆ, ಗುಹೇಶ್ವರನ ಆಹಾರಮುಖವ ?
--------------
ಅಲ್ಲಮಪ್ರಭುದೇವರು
ಬಸವಣ್ಣನ ಪ್ರಸಾದದಿಂದ ಭಕ್ತಿಜ್ಞಾನ ವೈರಾಗ್ಯ ಸಂಪನ್ನನಾದೆನಯ್ಯ. ಚೆನ್ನಬಸವಣ್ಣನ ಪ್ರಸಾದದಿಂದ ಷಟ್‍ಸ್ಥಲಜ್ಞಾನಸಂಪನ್ನನಾದೆನಯ್ಯ. ಪ್ರಭುದೇವರ ಪ್ರಸಾದದಿಂದ ಪರಶಿವತತ್ವಸ್ವರೂಪವೇ ಎನ್ನ ಸ್ವರೂಪವೆಂದರಿದು ಸಮಸ್ತ ಸಂಸಾರಪ್ರಪಂಚ ಕೊಡಹಿದೆನು ನೋಡಾ. ನೀಲಲೋಚನೆಯಮ್ಮನ ಪ್ರಸಾದದಿಂದ ನಿಜಲಿಂಗೈಕ್ಯನಾದೆನಯ್ಯ. ಮಹಾದೇವಿಯಕ್ಕಗಳ ಪ್ರಸಾದದಿಂದ ಸುತ್ತಿದ ಮಾಯಾಪಾಶವ ಹರಿದು ನಿರ್ಮಾಯನಾಗಿ ನಿರ್ವಾಣಪದದಲ್ಲಿ ನಿಂದೆನಯ್ಯ. ಸಿದ್ಧರಾಮಯ್ಯನ ಪ್ರಸಾದದಿಂದ ಶುದ್ಧ ಶಿವತತ್ವವ ಹಡೆದೆನಯ್ಯ. ಮೋಳಿಗೆಯ ಮಾರಿತಂದೆಗಳ ಪ್ರಸಾದದಿಂದ ಕಾಯದ ಕಳವಳನಳಿದು ಕರ್ಮನಿರ್ಮಲನಾಗಿ ವೀರಮಾಹೇಶ್ವರನಾದೆನು ನೋಡಾ. ಇವರು ಮುಖ್ಯವಾದ ಏಳುನೂರೆಪ್ಪತ್ತುಮರಗಣಂಗಳ ಪರಮಪ್ರಸಾದದಿಂದ ಎನ್ನ ಕರಣಂಗಳೆಲ್ಲವು ಲಿಂಗಕರಣಂಗಳಾಗಿ ಕರಣೇಂದ್ರಿಯಂಗಳ ಕಳೆದುಳಿದು ಇಂದ್ರಿಯಂಗಳಿಗೆ ನಿಲುಕದ ಸ್ಥಾನದಲ್ಲಿರ್ದು ಪರಮಾನಂದ ಪ್ರಭಾಮಯನಾಗಿರ್ದೆನು ನೋಡಾ. ನಿಮ್ಮ ಶರಣರ ಪ್ರಸಾದದಿಂದ ನಾನು ಪ್ರಸಾದಿಯಾಗಿರ್ದೆನು ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಹಿಂದಣಜನ್ಮದ ಸಂಸಾರವ ಮರೆದು, ಮುಂದಣ ಭವಬಂಧನಂಗಳ ಜರಿದು, ಸಂದೇಹ ಸಂಕಲ್ಪಗಳ ಹರಿದು, ನಿಮ್ಮ ಅವಿರಳಭಕ್ತಿಯ ಬೆಳಗಿನಲ್ಲಿ ಬೆರೆದು ಓಲಾಡುವ ಮಹಾಮಹಿಮರ ತೋರಿ ಬದುಕಿಸಯ್ಯ ಎನ್ನ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಸರ್ವಮಯ ನಿನ್ನ ಬಿಂದುವಾದಲ್ಲಿ ಆವುದನಹುದೆಂಬೆ, ಆವುದನಲ್ಲಾಯೆಂಬೆ? ಸರ್ವಚೇತನ ನಿನ್ನ ತಂತ್ರಗಳಿಂದ ಆಡುವವಾಗಿ ಇನ್ನಾವುದ ಕಾಯುವೆ, ಇನ್ನಾವುದ ಕೊಲುವೆ? ತರುಲತೆ ಸ್ಥಾವರ ಜೀವಂಗಳೆಲ್ಲಾ ನಿನ್ನ ಕಾರುಣ್ಯದಿಂದೊಗೆದವು. ಆರ ಹರಿದು ಇನ್ನಾರಿಗೆ ಅರ್ಪಿಸುವೆ? ತೊಟ್ಟು ಬಿಡುವನ್ನಕ್ಕ ನೀ ತೊಟ್ಟುಬಿಟ್ಟ ಮತ್ತೆ ನೀ ಬಿಟ್ಟರೆಂದು ಎತ್ತಿ ಪೂಜಿಸುತಿರ್ದೆ ದಸರೇಶ್ವರನೆಂದು.
--------------
ದಸರಯ್ಯ
ಇನ್ನಷ್ಟು ... -->