ಪ್ರಸಾದ ಪ್ರಸಾದವೆನುತಿಪ್ಪಿರಿ.
ಪ್ರಸಾದವೆಂತಿಪ್ಪುದು ? ಪ್ರಸಾದಿಯೆಂತಿಪ್ಪ ?
ಪ್ರಸಾದಗ್ರಾಹಕ ಎಂತಿರಬೇಕು ? ಎಂದರಿಯದೆ
ಪ್ರಸಾದವೆಂದು ಇಕ್ಕಿಹೆವೆಂಬರು, ಕೊಂಡೆಹೆವೆಂಬರು.
ಕೊಂಡು ನಗೆಗೆಡೆಯಾಗುತಿಪ್ಪರಯ್ಯಾ.
ಪ್ರಸಾದ ಪರಾಪರವಾದುದು,
ಶಾಂತನಾಗಿ, ಸತ್ಯನಾಗಿ, ಪ್ರಸನ್ನವಾಗಿಹುದು ಪ್ರಸಾದಿ.
ಕರ್ಮಣಾ ಮನಸಾ ವಾಚಾ ಗುರುಭಕ್ತಿವಿಚಕ್ಷಣಃ
ಶರೀರಂ ಪ್ರಾಣಮರ್ಥಂ ಚ ಸದ್ಗುರುಭ್ಯೋ ನಿವೇದಯೇತ್
ಎಂದು
ದೀಕ್ಷಾಮೂರ್ತಿ ಪರಶಿವಗುರುಲಿಂಗಕ್ಕೆ
ತನುಮನಧನವನರ್ಪಿಸುವುದು.
ಪೂಜಾಕಾರಮೂರ್ತಿ ಪರಮಗುರುಮಹಾಲಿಂಗಕ್ಕೆ
ತನುಮನಧನವರ್ಪಿಸಿ,
ಶಿಕ್ಷಾಮೂರ್ತಿ ಪರಮಗುರುಜಂಗಮಲಿಂಗಕ್ಕೆ
ತನು ಮನ ಧನವನರ್ಪಿಸಿ,
ಪ್ರಸನ್ನಪ್ರಸಾದವ ಪಡೆದು ಭೋಗಿಸಿ,
ಆ ಪ್ರಸಾದವ ಶುದ್ಧವ ಮಾಡಿ ನಿಲಿಸಿ,
ಶಾಂತನಾಗಿ, ನಿತ್ಯನಾಗಿ, ಪ್ರಸನ್ನಮೂರ್ತಿಯಾಗಿಪ್ಪ
ಆ ಪ್ರಸಾದಿಯೇ ಪ್ರಸಾದಗ್ರಾಹಕ.
ಆ ಪ್ರಸಾದಿಯೇ ಗುರುವೆಂದು, ಆ ಪ್ರಸಾದಿಯೇ ಲಿಂಗವೆಂದು
ಆ ಪ್ರಸಾದಿಯೇ ಜಂಗಮವೆಂದು
ತನುಮನಧನದಲ್ಲಿ ವಂಚನೆ ಇಲ್ಲದೆ
ಕೇವಲ ವಿಶ್ವಾಸದಿಂದ ನಂಬಿ ಪ್ರಸಾದವ ಗ್ರಹಿಸುವುದು.
ಇದು ಕಾರಣ,
ಪ್ರಸಾದಗ್ರಾಹಕನ ಪರಿಯೆಂಬ ಭಾವ ಹಿಂಗದೆ
ಇಕ್ಕುವ ಪರಿಯ ನೋಡಾ.
ಇದು ಕಾರಣ.
ಮಹಾನುಭಾವರ ಸಂಗದಿಂದ ಅರಿಯಬಹುದಯ್ಯಾ,
ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.